ಸಪ್ತಸಾಗರ ವಾರ್ತೆ ವಿಜಯಪುರ, ನ. 9: ಗ್ರಾಮೀಣ ಬಡ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸಲು ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಕಾರ್ಯ ನಿರ್ವಹಿಸಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.
ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಹಾಗೂ ಸಂಶೋಧನೆ ಕೇಂದ್ರದಲ್ಲಿ ಎರಡು ನೂತನ ಆರೋಗ್ಯ ವಾಹಿನಿ ಬಸ್ ಸೇವೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಆಸ್ಪತ್ರೆಯ ಸಿಬ್ಬಂದಿಗಳ ಪಾತ್ರವೂ ಮುಖ್ಯವಾಗಿದೆ. ಎಲ್ಲರೂ ನಿಷ್ಠೆ ಮತ್ತು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಅವರ ಜನ್ಮ ದಿನದ ಅಂಗವಾಗಿ ಈ ವಾಹಿನಿಗಳಿಗೆ ಚಾಲನೆ ನೀಡಲಾಗಿದೆ. ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಮತ್ತು ಕುಲಾಧಿಪತಿಗಳ ಕನಸಿನ ಯೋಜನೆ ಇದಾಗಿದೆ. ಈ ಆರೋಗ್ಯ ವಾಹಿನಿ ಬಸ್ಸುಗಳು ದೂರದ ಊರಿನಿಂದ ಬರುವ ಗ್ರಾಮೀಣ ಬಡ ರೋಗಿಗಳಿಗೆ ಅನುಕೂಲ ಒದಗಿಸಲಿವೆ. ವಿಜಯಪುರ ಜಿಲ್ಲೆಯ ಮತ್ತು ಸುತ್ತಮುತ್ತಲಿನ ಗ್ರಾಮೀಣ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು
ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಮಾತನಾಡಿ, ಆಸ್ಪತ್ರೆಯ ವೈದ್ಯರು ಇನ್ನೂ ಹೆಚ್ಚಿನ ಕಾಳಜಿ ವಹಿಸಿ ಬಡ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಕಾಲೇಜಿನ ಪ್ರಭಾರ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ಡಾ. ರಾಜೇಶ ಹೊನ್ನುಟಗಿ, ಎಲ್ಲ ವಿಭಾಗದ ಮುಖ್ಯಸ್ಥರು, ಆಸ್ಪತ್ರೆಯ ಸಿಬ್ಬಂದಿ , ಆರೋಗ್ಯ ವಾಹಿನಿಯ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಸೇವೆಗೆ ಚಾಲನೆ


