ಫೆ.2ರಂದು ನಗರದ ದರಬಾರ ಶಾಲೆಯಲ್ಲಿ ಉದ್ಯೋಗ ಮೇಳ: ನೋಂದಣಿಗೆ ಕ್ರಮವಹಿಸಿ- ಕಾಂತಾ ನಾಯಕ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.27:
ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಫೆ.2ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಗರದ ದರ್ಬಾರ ಶಾಲಾ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಲಾಗಿದೆ. ಈ ಉದ್ಯೋಗ ಮೇಳದಲ್ಲಿ ಜಿಲ್ಲೆಯ ನಿರುದ್ಯೋಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ https://udyogamela.kdckarnataka.com
ಮೂಲಕ ಕ್ಲಿಕ್‌ಮಾಡಿ ವಿವರ ಭರ್ತಿ ಮಾಡಿ, ನೋಂದಾಯಿಸಿಕೊಂಡು, ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಮಾಹಿತಿ ಒದಗಿಸುವಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕೌಶಲ್ಯದಿಂದ ಉದ್ಯೋಗದ ಕಡೆಗೆ–ಯುವ ಸಮೃದ್ಧಿ ಸಮ್ಮೇಳನ ಹಾಗೂ ಉದ್ಯೋಗ ಮೇಳದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಉದ್ಯೋಗ ಮೇಳಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ವೆಬ್‌ಸೈಟ್ ಮೂಲಕ ನೋಂದಾಯಿಸಿಕೊಂಡು ಸದುಪಯೋಗಪಡಿಸಿಕೊಳ್ಳಲು ಅಗತ್ಯ ಕ್ರಮವಹಿಸುವಂತೆ ಸಂಬಂಧಿಸಿದವರಿಗೆ ಅವರು ಸೂಚಿಸಿದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು ಹದಿನೈದು ಸಾವಿರಕ್ಕೂ. ಹೆಚ್ಚು ಫಲಾನುಭವಿಗಳಿದ್ದು, ಯುವನಿಧಿ ಫಲಾನುಭವಿಗಳು ನೋಂದಣಿ ಮಾಡಿಸಿ ಅವರ ಆಸಕ್ತಿ ಮತ್ತು ಅರ್ಹತೆ ಅನುಸಾರ ಉದ್ಯೋಗ ಹೊಂದಬಹುದಾಗಿದೆ. ವಿದ್ಯಾರ್ಥಿಗಳು ಮತ್ತು ಉದ್ಯೊಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ನಿಗದಿಪಡಿಸಿದ ಪೋರ್ಟಲ್ ಮೂಲಕ ಮುಂಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಸೇರಿದಂತೆ ಕರ್ನಾಟಕದ ವಿವಿಧ ನಗರಗಳಲ್ಲದೇ ಇತರೆ ರಾಜ್ಯಗಳಿಂದ ಸುಮಾರು 140ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಗಳು ಭಾಗವಹಿಸುವಂತೆ ಮೇಳದ ಮಾಹಿತಿ ನೀಡುವಂತೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರು ಬೃಹತ್ ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಂಡು ಭಾಗವಹಿಸಿ, ಮೇಳದ ಸದುಪಯೋಗ ಪಡೆದುಕೊಳ್ಳಲು ಎಲ್ಲಾ ಕಾಲೇಜಿನ ಪ್ರಾಚಾರ್ಯರು ತಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಈ ಮಾಹಿತಿ ನೀಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಬೇಕು ಎಂದು ಪ್ರಾಂಶುಪಾಲರಿಗೆ ಸೂಚಿಸಿದರು.
ಈ ಮೇಳದ ಯಶಸ್ವಿಗೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಉದ್ಯೋಗ ಮೇಳದಲ್ಲಿ ಯಾವುದೇ ಸಮಸ್ಯೆಬಾರದಂತೆ ಅಗತ್ಯ ಮಾಹಿತಿ ಕೇಂದ್ರ ಸ್ಥಾಪಿಸಿ ಯಾವುದೇ ಗೊಂದಲ ಆಗದ ರೀತಿಯಲ್ಲಿ ಕಾರ್ಯ ನಿರ್ವಹಿಸಿ, ವಿವಿಧ ಸಮಿತಿ ಹಾಗೂ ಉಪ ಸಮಿತಿ ರಚಿಸಿದ್ದು ಸಮಿತಿಗೆ ವಹಿಸಿದ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ,ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ ಮುದ್ದೇಬಿಹಾಳ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹೇಶ ಮಾಳವಾಡೇಕರ, ಕೌಶಲ್ಯಾಭಿವೃದ್ಧಿ ಇಲಾಖೆಯೆ ಸಹಾಯಕ ನಿರ್ದೇಶಕ ಮಹಾಂತೇಶ ಬಾಗೇವಾಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.

Share this