ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1 : ಬಾಂಗ್ಲಾದ ಪರಿಸ್ಥಿತಿಯ ಲಾಭ ಪಡೆದು ದೇಶದ ಜವಳಿ ಉದ್ಯಮ ಪುನಶ್ಚೇತನ ಹಾಗೂ ಕೃಷಿ ಆದಾಯ ದುಪ್ಟಟ್ಟುಗೊಳಿಸಿ ರೈತರ ಹಿತರಕ್ಷಣೆ ಮಾಡುವ ನಿಟ್ಟಿನಲ್ಲಿ ನಮ್ಮ ನಿರೀಕ್ಷೆಗಳನ್ನು ಕೇಂದ್ರದ ಬಜೆಟ್ ಹುಸಿಗೊಳಿಸಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.
ಜವಳಿ ಉದ್ಯಮ ಪುನಶ್ಚೇತನ, ಬಂಡವಾಳ ಹೂಡಲು ಉದ್ಯಮಿಗಳ ಆಕರ್ಷಣೆ ಹಾಗೂ ಸಿದ್ದ ಉಡುಪು ರಫ್ತು ಬಗ್ಗೆ ಎಷ್ಟರ ಮಟ್ಟಿಗೆ ಆದ್ಯತೆ ನೀಡುವ ಬಗ್ಗೆ ಸ್ಪಷ್ಟ ಚಿತ್ರಣ ಇಲ್ಲ ಎಂದಿದ್ದಾರೆ.
ರೈತರ ಆದಾಯ ದ್ವಿಗುಣಕ್ಕೆ ಪೂರಕವಾಗಿ ರೈತರ ಹಿತರಕ್ಷಣೆಯ ಕ್ರಮಗಳನ್ನು ಪ್ರಸ್ತಾಪ ಮಾಡಿಲ್ಲ. ಬೆಂಬಲ ಬೆಲೆ ಯೋಜನೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಯ ಪ್ರಮಾಣ ಹೆಚ್ಚಳ ಮಾಡುವ ಅಗತ್ಯವಿದೆ. ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಗೆ ಸಮಸ್ಯೆ ಇದೆ. ಈ ಬಗ್ಗೆ ರಾಜ್ಯದವರೇ ಆಗಿರುವ ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರದ ಮೇಲೆ ಒತ್ತಡ ತರಬೇಕಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಜವಳಿ, ಕೃಷಿ ಕ್ಷೇತ್ರದ ನಿರೀಕ್ಷೆಗಳು ಹುಸಿ- ಸಚಿವ ಶಿವಾನಂದ ಪಾಟೀಲ


