ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಅವಧಿಯಲ್ಲಿ 300 ವೈಫಲ್ಯ: ಜಿಗಜಿಣಗಿ ಟೀಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 19:
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರು ವರ್ಷದ ಆಡಳಿತದಲ್ಲಿ 300 ವೈಫಲ್ಯಗಳಿವೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಟೀಕಿಸಿದ್ದಾರೆ
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅವರ ಕೊರಳಿಗೆ 300 ವೈಫಲ್ಯಗಳ ಹಾರ ಹಾಕುವುದಾಗಿ ಹೇಳಿದರು.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸಿದ್ದರಾಮಯ್ಯನವರು ಪ್ರತಿಯೊಂದು ವಸ್ತುವಿನ ಮೇಲೆ ದುಬಾರಿ ತೆರಿಗೆ ಹಾಕಿ ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡಲು ನಮ್ಮದೇನೂ ಅಭ್ಯಂತರವಿಲ್ಲ. ಸರ್ಕಾರದ ಬಳಿ ಹಣವಿದ್ದರೆ ಮಾತ್ರ ಇಂಥ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.
ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತಂದು ಮಹಿಳೆಯರ ಗಂಡನ ಜೇಬಿಗೆ ಕೈಹಾಕಿದೆ. ಈ ರೀತಿ ಹಿಂದೆ ಯಾವ ಸರ್ಕಾರ ಮಾಡಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಪ್ರಚಲಿತ ಇರುವಂತೆ ಸಿದ್ದರಾಮಣ್ಣ ಅವರ ಸರ್ಕಾರ ಜಂಪರ್ ನಲ್ಲಿ ಕಡಿತ ಮಾಡಿ ಸೀರೆಯಲ್ಲಿ ಹಿಡಿದಿದೆ ಎಂದು ಲೇವಡಿ ಮಾಡಿದರು.
ಮಾಜಿ ಸಚಿವ ಅಪ್ಪಸಾಹೇಬ ಪಟ್ಟಣಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಪತ್ರಿಕಾಗೋಷ್ಟಿಯಲ್ಲಿ ಇದ್ದರು.

Share this