ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 9 :
ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜ್ ನಿರ್ಮಾಣ ಕೈ ಬಿಟ್ಟು ಪೂರ್ಣ ಪ್ರಮಾಣದ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ ಮಾರ್ಗವಾಗಿ ಸಾಗಿದ ರ‍್ಯಾಲಿಯಲ್ಲಿ ನೂರಾರು ವಿದ್ಯಾರ್ಥಿಗಳು `ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು, ಪಿಪಿಪಿ ಮಾದರಿ ಕೈಬಿಡಿ ಎಂದು ಘೋಷಣೆ ಕೂಗಿದರು.
ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್‌ವರೆಗೂ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಹೋರಾಟ ಸಮಿತಿ ಸದಸ್ಯ ಬಿ.ಭಗವಾನ್ ರೆಡ್ಡಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು ೧೪೯ ಎಕರೆಗೂ ಹೆಚ್ಚು ಸ್ಥಳಾವಕಾಶ ಸರಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಇಲ್ಲ, ಸರ್ಕಾರ ಇದನ್ನು ಗುರುತಿಸಿ ಪಿಪಿಪಿ ಮಾದರಿಯನ್ನು ಯಾವ ಕಾರಣಕ್ಕೂ ವಿಜಯಪುರದಲ್ಲಿ ತರಲು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಕರೆ ನೀಡಿದರು.
ಧುರೀಣ ಅಣ್ಣರಾಯ ಈಳಗೇರ ಮಾತನಾಡಿ, ಒಂದು ವೇಳೆ ಖಾಸಗಿ ಸಹಭಾಗಿತ್ವದಲ್ಲಿ ಕಾಲೇಜು ಆರಂಭವಾದರೆ ಅಲ್ಲಿ ಬಡ ಮತ್ತು ಮಧ್ಯಮ ವರ್ಗದ ಹಾಗೂ ಜನಸಾಮಾನ್ಯರ ಮಕ್ಕಳು ಕಲಿಯಲು ಸಾಧ್ಯವಾಗುವುದಿಲ್ಲ. ಇದು ಮುಂದೆ ಕ್ರಮೇಣ ಸಂಪೂರ್ಣ ಖಾಸಗೀಕರಣಗೊಂಡು ಬಡವರ ಶಿಕ್ಷಣದ ಹಕ್ಕನ್ನು ಕಿತ್ತುಕೊಳ್ಳುತ್ತದೆೆ. ನಾವೆಲ್ಲರೂ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟಕ್ಕೆ ಸಜ್ಜಾಗಬೇಕಾಗುತ್ತದೆ ಎಂದರು.
ಹಿರಿಯ ಸಾಹಿತಿ ಸುಭಾಷ್ ಯಾದವಾಡ ಮಾತನಾಡಿ, ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು. ಎಲ್ಲಾ ಮಕ್ಕಳು ಕಡಿಮೆ ಹಣದಿಂದ ವೈದ್ಯಕೀಯ ಶಿಕ್ಷಣ ಪಡೆಯಬಹುದು. ಆದ್ದರಿಂದ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದರು.
ಅಕ್ರಂ ಮಾಶಾಳಕರ, ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಚಂದ್ರಶೇಖರ ಘಂಟೆಪ್ಪಗೋಳ, ಫಾ.ಕೆವಿನ್, ಮಲ್ಲಿಕಾರ್ಜುನ ಕೆಂಗನಾಳ, ಲಲಿತಾ ಬಿಜ್ಜರಗಿ, ಜಗದೇವ ಸೂರ್ಯವಂಶಿ, ಶ್ರೀನಾಥ ಪೂಜಾರಿ, ಬೋಗೇಶ ಸೊಲ್ಲಾಪುರ, ದಸ್ತಗಿರ ಉಕ್ಕಲಿ, ಶಿವಬಾಳಮ್ಮ ಕೊಂಡಗೂಳಿ, ಗೀತಾ ಹೆಚ್, ಕಾವೇರಿ ರಜಪೂತ, ಸಿದ್ದಲಿಂಗ ಬಾಗೇವಾಡಿ, ಮಹದೇವಿ ಧರ್ಮಶೆಟ್ಟಿ, ಶಶಿಕಲಾ ಮ್ಯಾಗೇರಿ, ಸುರೇಖಾ ರಜಪೂತ, ಅನುಸೂಯ ಕಾಂಬಳೆ, ಮಲ್ಲಿಕಾರ್ಜುನ ಬಟಗಿ, ಬಾಬುರಾವ್ ಬೀರಕಬ್ಬಿ, ಸಿದ್ರಾಮ ಹಿರೇಮಠ, ಶಿವಾನಂದ, ಗಂಗಮ್ಮ ಉಳ್ಳಾಗಡ್ಡಿ, , ಪ್ರಭುಗೌಡ ಪಾಟೀಲ, ಅಬ್ದುಲ್ ರೆಹಮಾನ್ ಬಿದರಕುಂದಿ, ಫಯಾಜ್ ಕಲಾದಗಿ, ಅಕ್ಷಯ ಅಜಮನಿ, ವಿ.ಎ. ನಾಗಠಾಣ, ಚಂದ್ರಶೇಖರ ಲೆಂಡಿ, ಮಲ್ಲಿಕಾರ್ಜುನ, ವೆಂಕಟೇಶ, ಸುರೇಶ ಬಿಜಾಪುರ, ಸಂಘರ್ಷ ಹೊಸಮನಿ, ಸಂಗಮೇಶ ಸಗರ, ಸಿದ್ದನಗೌಡ ಪಾಟೀಲ, ಲಕ್ಷ್ಮಣ ಕಂಬಾಗಿ, ರೆಹಮಾನ್,ವಾಸುದೇವ ಕಾಳೆ, ಜಬೀನಾ ಖಾನಂ ಉಪಸ್ಥಿತರಿದ್ದರು.

Share