ಸಪ್ತಸಾಗರ ವಾರ್ತೆ,ವಿಜಯಪುರ, ನ. 24: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರ ವತಿಯಿಂದ ಕಮಲಾದೇವಿ ಪಾಟೀಲ ಮೆಮೋರಿಯಲ್ ಎಜ್ಯುಕೇಶನಲ್ ಅಸೋಸಿಯೇಶನ್ ಹಾಗೂ ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲೆ- ನಾಡು ನುಡಿ ಚಿಂತನ ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಕಮ್ಮಟ ನವೆಂಬರ್ 27ರ ಬೆಳಿಗ್ಗೆ 10ಗಂಟೆಗೆ ಸಾಯಿ ಪಾರ್ಕ್ ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಜಯಪುರದ ಚಾಣಕ್ಯ ಕರಿಯರ್ ಅಕಾಡೆಮಿಯ ಸಂಸ್ಥಾಪಕ ಎನ್.ಎಂ.ಬಿರಾದಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ನೇಗಿಲಯೋಗಿ ಟ್ರಸ್ಟಿನ ಅಧ್ಯಕ್ಷ ಡಾ.ಎಚ್.ಆರ್.ಸ್ವಾಮಿ ಭಾಗವಹಿಸಲಿದ್ದು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯೆ ದಾಕ್ಷಾಯಿಣಿ ಹುಡೇದ ಉಪಸ್ಥಿತರಿರಲಿದ್ದಾರೆ. ಆದಿಲ್ ಶಾಹಿ ಸಾಹಿತ್ಯ – ಕನ್ನಡ ಅನುವಾದಗಳು ವಿಷಯವಾಗಿ ಕಲಬುರಗಿ ಸಾರಿಗೆ ಇಲಾಖೆಯ ವಿಶ್ರಾಂತ ಅಧೀಕ್ಷಕ ರಿಯಾಜ್ ಅಹ್ಮದ ಬೋಡೆ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಅಂದು ಮಧ್ಯಾಹ್ನ 12 ರಿಂದ 1.30ರವರೆಗೆ ಗೋಷ್ಠಿ-1ರ ವಚನ ಸಂಗೋಪನೆ ಮತ್ತು ಹಳಕಟ್ಟಿಯವರ ಕೊಡುಗೆ ಕುರಿತು ಟಕ್ಕಳಕಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬನಶ್ರೀ ಹತ್ತಿ ಹಾಗೂ ಗಡಿ ಭಾಗದ ಕನ್ನಡ ಶಾಲೆಗಳು ಮತ್ತು ಸ್ಥಿತಿಗತಿಯ ಕುರಿತು ಬೆಂಗಳೂರಿನ ಎಂವಿಜೆ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಮದಗೊಂಡ ಬಿರಾದಾರ ಅವರು ವಿಷಯ ಮಂಡಿಸಲಿದ್ದಾರೆ. ಗೋಷ್ಠಿ-1ರ ಅಧ್ಯಕ್ಷತೆಯನ್ನು ವಿಶ್ರಾಂತ ಪ್ರಾಂಶುಪಾಲರಾದ ಪ್ರೊ.ವ್ಹಿ.ಎಂ. ಸುರಪುರ ಅವರು ವಹಿಸಲಿದ್ದಾರೆ.
ಮಧ್ಯಾಹ್ನ 2.30 ರಿಂದ ಸಂಜೆ 4ಗಂಟೆಯವರೆಗೆ ನಡೆಯಲಿರುವ ಗೋಷ್ಠಿ-2ರ ಗೋಕಾಕ ಚಳುವಳಿ ಮತ್ತು ವಿಜಯಪುರ ಜಿಲ್ಲೆ ವಿಷಯವಾಗಿ ಸಿಂದಗಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಎಂ.ಎ. ಪಡಶೆಟ್ಟಿ ಹಾಗೂ ಜಿಲ್ಲೆಯ ಶಿಕ್ಷಣ ಸಂಸ್ಥೆಗಳು ಮತ್ತು ಕನ್ನಡದ ಏಳಿಗೆ ಕುರಿತು ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸದಸ್ಯೆ ದಾಕ್ಷಾಯಿಣಿ ಬಿರಾದಾರ ವಿಷಯ ಮಂಡಿಸುವರು. ಈ ಗೋಷ್ಠಿಯ ಅಧ್ಯಕ್ಷತೆಯನ್ನು ಜಂಬಗಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ರೇಣುಕಾ ವೈ ಕೊಣ್ಣೂರ ಅವರು ವಹಿಸಲಿದ್ದಾರೆ.
ಅಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು,ರಾಜ್ಯಸಭೆಯ ಮಾಜಿ ಸದಸ್ಯರೂ ಆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಎಲ್ ಹನುಮಂತಯ್ಯ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಟಿ ಮೇರವಾಡೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


