ವ್ಯಸನ ಮುಕ್ತ ದಿನಾಚರಣೆ-ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. 1 ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಂದು ಬೆಳಿಗ್ಗೆ 9:30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜನಜಾಗೃತಿ ಜಾಥಾ ಚಾಲನೆಗೊಳ್ಳಲಿದೆ. ಜಾಥಾವು ನಗರದ ಗಾಂಧಿ ವೃತ್ತ ಮಾರ್ಗವಾಗಿ, ಬಸವೇಶ್ವರ ವೃತ್ತ,ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತದ ಮೂಲಕ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರಕ್ಕೆ ತಲುಪಲಿದೆ. ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವೆನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ, ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಡಾ. ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ಸಮಾಜ ನಿರ್ಮಾಣದ ಕನಸು ಹೊತ್ತು, ಮನೆ-ಮನೆಗೆ ಹೋಗಿ ದುರ್ವ್ಯಸನ ಹಾಗೂ ದುಶ್ಚಟಗಳ ದಾಸ್ಯದಿಂದ ಜನಸಾಮಾನ್ಯರನ್ನು ಹೊರತರಲು ಅವಿರತ ಶ್ರಮಿಸಿದರು. ಹಲವಾರು ಸಮಾಜ ಸುಧಾರಣೆ ಕಾರ್ಯಗಳೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿಯೂ ತಮ್ಮನ್ನು ಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ತೊಡಗಿಸಿಕೊಂಡಿದ್ದ ಡಾ. ಮಹಾಂತ ಶಿವಯೋಗಿಗಳು ಸಮಾಜ ಸುಧಾರಣೆಯ ಮೊದಲ ಹಾಗೂ ಅತಿಮುಖ್ಯ ಹೆಜ್ಜೆ ಮನಃಪರಿವರ್ತನೆ ಎಂಬುದನ್ನು ಅರಿತಿದ್ದರು. ವ್ಯಸನದಿಂದ ಮುಕ್ತರಾಗಲು ಮೊದಲು ಮನಸ್ಸನ್ನು ಈ ಪಿಡುಗಿನಿಂದ ಮುಕ್ತಗೊಳಿಸಬೇಕು ಎಂದು ನಂಬಿದ್ದರು ಎಂದು ಹೇಳಿದರು.
ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಆ. 1 ರಂದು ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಿ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.
ಅರ್ಥಪೂರ್ಣ ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಸಕಾಲದಲ್ಲಿ ವಿತರಣೆ ಮಾಡುವುದು. ಜಾಥಾ ಕಾರ್ಯಕ್ರಮ ಯಾವುದೇ ಲೋಪವಾಗದಂತೆ ಕಾರ್ಯಕ್ರಮ ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಯಿತು.
ಸಭೆಯಲ್ಲಿ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ಅಶೋಕ ಘೋಣಸಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕ್ರೀಡಾಧಿಕಾರಿ ರಾಜಶೇಖರ ದೈವಾಡಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋರೋಗ ತಜ್ಞ ಡಾ. ಮಂಜುನಾಥ ಮಸಳಿ, ಡಾ. ಸಿ. ಪ್ರಕಾಶ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಮೊಹಮ್ಮದ ಯಾಸೀನ್, ಸಮಾಜ ಕಲ್ಯಾಣ ಇಲಾಖೆಯ ಅರವಿಂದ ಲಂಬೂ, ಜಿ.ಎಮ್ ಕೋಲೂರ, ಕಾರ್ಮಿಕ ಇಲಾಖೆಯ ಮಲ್ಲಿಕಾರ್ಜುನ, ಪೊಲೀಸ್ ಇಲಾಖೆಯ ಸರೋಜಿನಿ ಕೋಲ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಕೇಶ್, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ ಉಪಸ್ಥಿತರಿದ್ದರು.

Share