ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 4:
ಪಶ್ಚಿಮ ಬಂಗಾಳದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ದೇಶದ ಇತಿಹಾಸದಲ್ಲಿಯೇ ಇದೊಂದು ಐತಿಹಾಸಿಕ ಮೈಲಿಗಲ್ಲು. ದೇಶದೆಲ್ಲೆಡೆ ಹೊಸ ಸಂಚಲನ ಸೃಷ್ಠಿಯಾಗಿದ್ದು, ಕಾರ್ಯಕರ್ತರಲ್ಲಿ ಆತ್ಮ ವಿಶ್ವಾಸ ಇಮ್ಮಡಿಸಿದೆ ಎಂದು ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಪಶ್ಚಿಮ ಬಂಗಾಳದ ಫಲಿತಾಂಶ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ದಶಕಗಳ ಹೋರಾಟದ ಫಲವಾಗಿ ಪಶ್ಚಿಮ ಬಂಗಾಳದಲ್ಲಿ ಕೇಸರಿ ಬಾವುಟ ಹಾರಾಡುತ್ತಿದೆ. ಇದು ಶಾಮ್ಪ್ರಸಾದ್ ಮುಖರ್ಜಿ ಅವರ ದೂರದೃಷ್ಠಿಯ ಫಲ ಮತ್ತು ಈ ಗೆಲುವು ಅವರ ಕನಸು ನನಸಾಗುತ್ತಿರುವುದರ ಪ್ರತೀಕ ಎಂದು ಕೊಂಡಾಡಿದರು.
ಈ ಗೆಲುವು ಅಸಂಖ್ಯಾತ ಕಾರ್ಯಕರ್ತರ ತ್ಯಾಗ, ಸಂಘರ್ಷ ಹಾಗೂ ಪ್ರಾಮಾಣಿಕ ಸೇವೆಯ ಫಲ. ಇನ್ನು ಅಸ್ಸಾಂನಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ದೇಶದಲ್ಲಿನ್ನೂ ಬಿಜೆಪಿಯ ಅಲೆ ಇದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಮುಂದಿನ ದಿನಮಾನಗಳಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗಲಿದೆ. ಕಾಂಗ್ರೆಸ್ ಮುಕ್ತ ಭಾರತದ ಕನಸು ನನಸಾಗುವ ದಿನಗಳು ದೂರವಿಲ್ಲವೆಂದು ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲವು: ಕಾರ್ಯಕರ್ತರ ಶಕ್ತಿ ಇಮ್ಮಡಿ-ಜಿಗಜಿಣಗಿ


