ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:
ಜಿಲ್ಲೆಯಾದ್ಯಂತ ಆಚರಿಸುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪಿಒಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳನ್ನು ಬಳಸುವುದು ನಿಷೇಧದ ಬಗ್ಗೆ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಕುರಿತು ಜನರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಸೂಚಿಸಿದ್ದಾರೆ.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಬಣ್ಣ ಮಿಶ್ರಿತ ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ, ಉತ್ಪಾದನೆ, ಮಾರಾಟ ಹಾಗೂ ಸಂಗ್ರಹಿಸುವುದು ನಿಷೇಧವಿರುವ ಕುರಿತು ಹಾಗೂ ಪರಿಸರ ಸ್ನೇಹಿ ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಮಾಡುವಂತೆ ತಾಲೂಕಾ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಿ ಸೂಕ್ತ ತಿಳಿವಳಿಕೆ ಮೂಡಿಸುವಂತೆ ಅವರು ಸೂಚನೆ ನೀಡಿದರು.
ಎಲ್ಲಾ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಗಣೇಶ ಮೂರ್ತಿ ತಯಾರಕರೊಂದಿಗೆ ಮತ್ತು ಗಣೇಶ ಮಹಾ ಮಂಡಳಿಗಳೊಂದಿಗೆ ಸಭೆ ನಡೆಸುವ ಮೂಲಕ ಪ್ಲ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸಲಾದ ವಿಗ್ರಹಗಳ ಉತ್ಪಾದನೆ, ಸಂಗ್ರಹಣೆ ನಿಷೇಧವಿರುವ ಕುರಿತು ತಿಳಿವಳಿಕೆ ನೀಡಲು ಅವರು ಸೂಚಿಸಿದರು.
ಪರಿಸರ ಸ್ನೇಹಿ ಹಬ್ಬದ ಆಚರಣೆ ಮತ್ತು ಮಣ್ಣಿನ ಗಣೇಶ ಮೂರ್ತಿ ಬಳಕೆಯ ಬಗ್ಗೆ ಮಾಧ್ಯಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಹೂವು, ವಸ್ತು, ಪ್ಲಾಸ್ಟಿಕ್ ಹಾರ ಮುತ್ತಿತರ ಅಲಂಕಾರಿಕ ವಸ್ತು ಘನ ತ್ಯಾಜ್ಯ ವಸ್ತುಗಳನ್ನು ಗಣೇಶ ಮೂರ್ತಿಗಳೊಂದಿಗೆ ವಿಸರ್ಜಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.
ಪ್ಲ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿದ ಗಣೇಶ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ವ್ಯಾಪಾರ ಲೈಸನ್ಸ್ ನೀಡದಂತೆ ಹಾಗೂ ಈಗಾಗಲೇ ಲೈಸನ್ಸ್ ನೀಡಿದ್ದಲ್ಲಿ ಮರಳಿ, ವಾಪಸ್ಸು ಪಡೆಯುವಂತೆ ಸೂಚಿಸಿದರು.
ಅನಧಿಕೃತ ಮಾರಾಟ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಸೂಚಿಸಿದರು.
ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮತ್ತು ಮಾರಾಟವನ್ನು ಉತ್ತೇಜಿಸಬೇಕು. ಅದರಂತೆ ಜಲಮೂಲಗಳಲ್ಲಿ ವಿಸರ್ಜಿಸದಂತೆ ಎಚ್ಚರ ವಹಿಸುವುದರ ಜೊತೆಗೆ ಸೂಕ್ತ ಪ್ರದೇಶದಲ್ಲಿ ಅವಶ್ಯಕತೆಗನುಗುಣವಾಗಿ ಕೃತಕ ಕೆರೆ, ಹೊಂಡಗಳನ್ನು ನಿರ್ಮಿಸಿ ಮೂರ್ತಿ ವಿಸರ್ಜನೆಗೆ ಅವಕಾಶ ಕಲ್ಪಿಸುವಂತೆ ಅವರು ಸೂಚನೆ ನೀಡಿದರು.
ಹೊರ ರಾಜ್ಯದಿಂದ ನಗರ ಮತ್ತು ಪಟ್ಟಣಕ್ಕೆ ಪಿಒಪಿ ವಿಗ್ರಹಗಳನ್ನು ಬರದಂತೆ ತಡೆಯಲು ಜಿಲ್ಲೆಯ ಗಡಿ ಭಾಗದ ಠಾಣೆ ಹಾಗೂ ಚೆಕ್ ಫೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದು ಅವರು ಸೂಚಿಸಿದರು .
ಪಟಾಕಿ ಮಾರಾಟಗಾರರು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾರಾಟವಾಗುವಂತೆ ನೋಡಿಕೊಳ್ಳಬೇಕು. ಧ್ವನಿವರ್ಧಕ ಬಳಸಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದುಕೊಳ್ಳಬೇಕು. ನಿಗದಿತ ಸಮಯದಲ್ಲಿ ಧ್ವನಿವರ್ಧಕ ಬಳಕೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಾ ಮಟ್ಟದಲ್ಲಿ ಸಭೆ ನಡೆಸುವುದರ ಮೂಲಕ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ಜನರ ಸುರಕ್ಷತೆಯ ದೃಷ್ಠಯಿಂದ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.
ಈ ಸಭೆಯಲ್ಲಿ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ್ ಸೌದಾಗರ, ಪರಿಸರ ಅಧಿಕಾರಿ ವಿವೇಕ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಯ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಪರಿಸರ ಸ್ನೇಹಿ ಗಣೇಶ ವಿಗ್ರಹಗಳ ಬಳಕೆ ಕುರಿತು ಸೂಕ್ತ ತಿಳುವಳಿಕೆ ಮೂಡಿಸಿ- ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ
