ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2: ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಅಕ್ಯಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ವ್ಯವಸ್ಥೆಯು ವಿದ್ಯಾರ್ಥಿಗಳ ಅಧ್ಯಯನ ವಿಧಾನದಲ್ಲಿ ಮಹತ್ತರ ಬದಲಾವಣೆ ತರಲಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ಅಂತರಿಕ ಗುಣಮಟ್ಟ ಭರವಸೆ ಕೋಶ, ಪ್ರಧಾನಮಂತ್ರಿ ಉಚ್ಛತರ ಶಿಕ್ಷಣ ಅಭಿಯಾನ ಪಿಎಮ್-ಉಷಾ, ಭಾರತದ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಹಯೋಗದೊಂದಿಗೆ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗಾಗಿ ಇತ್ತೀಚಿಗೆ ಹಮ್ಮಿಕೊಂಡಿದ್ದ ಶೈಕ್ಷಣಿಕ ಕ್ರೆಡಿಟ್ ಬ್ಯಾಂಕನ್ನು ಅಳವಡಿಸಿಕೊಳ್ಳುವುದು ಕುರಿತ ಅರಿವು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಅವಕಾಶಗಳನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಉಪಯೋಗಿಸಿಕೊಂಡರೆ, ತಮ್ಮ ಆಸಕ್ತಿಯ ಪ್ರಕಾರ ದೇಶದ ಬೇರೆ ವಿವಿಗಳಿಂದಲೂ ಕೋರ್ಸ್ ಗಳನ್ನು ಪೂರೈಸಿ, ಅದಕ್ಕೆ ಸಂಬಂಧಿಸಿದ ಕ್ರೆಡಿಟ್ಗಳನ್ನು ಅಕ್ಯಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ಮೂಲಕ ಸೇರಿಸಿಕೊಳ್ಳಬಹುದು. ಅಷ್ಟೇ ಅಲ್ಲದೇ ಕ್ರೆಡಿಟ್ ಆಧಾರಿತ ಅಧ್ಯಯನ ಪದ್ಧತಿಯಿಂದ ವಿದ್ಯಾರ್ಥಿಗಳ ಕಲಿಕೆಯ ವ್ಯಾಪ್ತಿ ಹೆಚ್ಚಾಗುತ್ತದೆ ಮತ್ತು ಜ್ಞಾನ ವಿನಿಮಯ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳನ್ನು ವಿಸ್ತರಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ವಿಜಯಪುರದ ಬಿ.ಎಲ್.ಡಿ.ಇ.ಎ ಯ ಎಸ್.ಬಿ ಕಲಾ ಹಾಗೂ ಕೆ.ಸಿ.ಪಿ ವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಅನೀಲ ಕುಮಾರ ಪಾಟೀಲ ಮಾತನಾಡಿ, ವಿವಿಧ ಆಯಾಮಗಳ ಕುರಿತು ಉಪನ್ಯಾಸ ನೀಡುವುದರ ಜೊತೆಗೆ ಪ್ರಾಯೋಗಿಕ ಪ್ರದರ್ಶನಗಳನ್ನು ನಡೆಸಿದರು.
ಅಧ್ಯಕ್ಷತೆ ವಹಿಸಿದ್ದ ಕುಲಸಚಿವ ಎಸ್.ಎಸ್. ಸೋಮನಾಳ ಮಾತನಾಡಿ, ಪ್ರಧಾನ ಮಂತ್ರಿ ಉನ್ನತ ಶಿಕ್ಷಣ ಅಭಿಯಾನದಡಿಯಲ್ಲಿನ ಅಕಾಡಿಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ ಕಾರ್ಯಕ್ರಮವಾಗಿದೆ, ವಿದ್ಯಾರ್ಥಿನಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸೂಚಿಸಿ, ವಿದ್ಯಾರ್ಥಿನಿಯರಿಗೆ ರಸಪ್ರಶ್ನೆಗಳನ್ನು ಕೇಳಿದರು.
ಕಾರ್ಯಕ್ರಮದಲ್ಲಿ ೪೦೦ಕ್ಕೂ ಹೆಚ್ಚು ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಿರ್ದು. ಗಣಕ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಜಿ.ಜಿ. ರಜಪೂತ, ತುಮಕೂರು ವಿಶ್ವವಿದ್ಯಾಲಯದ ಗ್ರಂಥಾಲಯ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ, ಡಾ. ರೂಪೇಶ ಕುಮಾರ ಹಾಗೂ ಮತ್ತಿತರರು ಉಪಸ್ತಿತರಿದ್ದರು.
ಐ.ಕ್ಯೂ.ಎ.ಸಿ ನಿರ್ದೇಶಕ ಪ್ರೊ. ಪಿ.ಜಿ.ತಡಸದ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಕು. ಶಿವಗಂಗಾ ನಿರೂಪಿಸಿದರು.
ಕ್ರೆಡಿಟ್ ಬ್ಯಾಂಕ್ ಮೌಲ್ಯಯುತ ಅಧ್ಯಯನ ವ್ಯವಸ್ಥೆ: ಪ್ರೊ. ವಿಜಯಾ ಕೋರಿಶೆಟ್ಟಿ


