ಸಪ್ತಸಾಗರ ವಾರ್ತೆ ವಿಜಯಪುರ, ಡಿ.23: ಡಿಸೆಂಬರ್.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆ ಹಾಗೂ ಜನೆವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡು, ಡಿ.29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ದಿನಾಚರಣೆಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 10.30ಕ್ಕೆ ಆಚರಿಸಲಾಗುವುದು.
ಕಾರ್ಯಕ್ರಮದ ಅಂಗವಾಗಿ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರದ ಮೆರವಣಿಗೆ ಅಂಬೇಡ್ಕರ್ ವೃತ್ತದಿಂದ 9.30ಕ್ಕೆ ಜಿಲ್ಲಾಧಿಕಾರಿಗಳ ಆವರಣದವರೆಗೆ ನಡೆಸಲು ನಿರ್ಧರಿಸಲಾಯಿತು.
ಜನವರಿ 1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ನಗರದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9.30ಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯೂ ವಿವಿಧ ಕಲಾ ತಂಡಗಳೊಂದಿಗೆ ಕನಕದಾಸರ ವೃತ್ತದ ಮಾರ್ಗವಾಗಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಮಾರೋಪಗೊಳ್ಳುವುದು. ಅದೇ ದಿನ ಬೆಳಿಗ್ಗೆ 10:30ಗಂಟೆಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು.
ಅಂದು ನಗರದ ಎಲ್ಲ ಮಹನೀಯರ ವೃತ್ತಗಳನ್ನು ಸ್ವಚ್ಛಗೊಳಿಸಿ, ದೀಪಾಲಂಕಾರ ಮಾಡುವಂತೆ ಮಹಾನಗರ ಪಾಲಿಕೆಗೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ,ಡಿವೈಎಸ್ ಪಿ ಸುನೀಲ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಸಮಾಜ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸೇರಿದಂತೆ ಇತರರು ಉಪಸ್ಥಿತರಿದ್ದರು.
ಡಿ.29ರಂದು ರಾಷ್ಟ್ರಕವಿ ಕುವೆಂಪು-ಜನವರಿ 1 ರಂದು ವಿಶ್ವ ಕರ್ಮ ಅಮರಶಿಲ್ಪಿ ಜಕಣಾಚಾರಿಜಯಂತಿ ಆಚರಣೆಗೆ ನಿರ್ಧಾರ


