NEET ಪರೀಕ್ಷೆಯ ಭ್ರಷ್ಟಾಚಾರ ಮತ್ತು ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಆಕ್ರೋಶ: ಬಿಜೆಪಿ ಕಚೇರಿಗೆ ಮುತ್ತಿಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 14 : ದೇಶದ ಅತ್ಯಂತ ಮಹತ್ವದ ವೈದ್ಯಕೀಯ ಪ್ರವೇಶ ಪರೀಕ್ಷೆಯಾಗಿರುವ NEET ಪರೀಕ್ಷೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮಗಳು, OMR ತಿದ್ದುಪಡಿ ಹಾಗೂ ಭ್ರಷ್ಟಾಚಾರ ಪ್ರಕರಣಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳಿವೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಿಜಯಪುರ ಬಿಜೆಪಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗಿದೆ.
ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, National Testing Agency (NTA) ನಡೆಸುತ್ತಿರುವ NEET ಪರೀಕ್ಷೆಯಲ್ಲಿ ಪಾರದರ್ಶಕತೆ ಸಂಪೂರ್ಣವಾಗಿ ಕುಸಿದಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಅನ್ಯಾಯವಾಗುತ್ತಿದೆ. 2024 ರಿಂದ ಅನೇಕ ಅಕ್ರಮ ಆರೋಪಗಳು ಹೊರಬಂದಿದ್ದು, CBI ತನಿಖೆಯಲ್ಲಿಯೂ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಹಣ ಪಡೆದು ಅಂಕ ಹೆಚ್ಚಿಸುವ ಜಾಲಗಳು ಬೆಳಕಿಗೆ ಬಂದಿವೆ.
ಇತ್ತೀಚೆಗೆ NEET-UG 2026 ಪರೀಕ್ಷೆಯನ್ನೂ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಪಡಿಸಿರುವುದು ಕೇಂದ್ರ ಸರ್ಕಾರ ಹಾಗೂ NTA ಯ ಸಂಪೂರ್ಣ ವೈಫಲ್ಯವನ್ನು ತೋರಿಸುತ್ತದೆ. ದೇಶದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಸುಪ್ರೀಂ ಕೋರ್ಟ್ ಕೂಡ NEET ಪರೀಕ್ಷೆಯ “sanctity” ಹಾನಿಯಾಗಿದೆ ಎಂದು ಹೇಳಿ ಕೇಂದ್ರ ಸರ್ಕಾರ ಹಾಗೂ NTA ಯಿಂದ ಉತ್ತರ ಕೇಳಿರುವುದು ಈ ಅಕ್ರಮದ ಗಂಭೀರತೆಯನ್ನು ಸ್ಪಷ್ಟಪಡಿಸುತ್ತದೆ.
ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವಲ್ಲಿ ವಿಫಲವಾಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಭದ್ರತೆ ಒದಗಿಸಲು ಸಾಧ್ಯವಾಗದೇ ಇರುವುದರಿಂದ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳು ಅತ್ಯಂತ ಹೆಚ್ಚು ಸಂಕಷ್ಟ ಅನುಭವಿಸುತ್ತಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ.
ಆದ್ದರಿಂದ ದ್ರಾವಿಡ ವಿದ್ಯಾರ್ಥಿ ಪರಿಷತ್ ಕೆಳಕಂಡ ಬೇಡಿಕೆಗಳನ್ನು ಮುಂದಿರಿಸಿದೆ.
NEET ಪರೀಕ್ಷೆಯ ಎಲ್ಲಾ ಅಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು.
NTA ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು
ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಬೇಕು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಲಾಯಿತು.
ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಯಾವುದೇ ಭ್ರಷ್ಟ ವ್ಯವಸ್ಥೆಯನ್ನು ದ್ರಾವಿಡ ವಿದ್ಯಾರ್ಥಿ ಪರಿಷತ್ ಸಹಿಸುವುದಿಲ್ಲ ಎಂದು ಸಂಘಟನೆ ಎಚ್ಚರಿಸಿದೆ.
ಈ ಸಂದರ್ಭದಲ್ಲಿ ದ್ರಾವಿಡ್ ವಿದ್ಯಾರ್ಥಿ ಪರಿಷತ್ ಉಪಾಧ್ಯಕ್ಷ ಕಿರಣಗೌಡ ಬಿರಾದಾರ, ಕಾರ್ಯದರ್ಶಿ ರಾಹುಲ್ ಕಳಸದವರ, ಮುಖಂಡರಾದ ಮಂಜುನಾಥ ಕವಳಿ, ಪ್ರವೀಣ ಕರ್ನಾಳ, ಶರಣು ಯಾದಳ್ಳಿ, ವಿರೇಶ್, ಶ್ರಾವಣ, ಅಲ್ತಾಪ್, ಶಿವು, ವಿಜಯ್, ಅಜಯ, ಮುಂತಾದವರು ಭಾಗಿಯಾಗಿದ್ದರು.

Share this