ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು.
ಯುವಕರು ಆಟೋಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸದೃಢವಾದ ಆರೋಗ್ಯ ಹೊಂದಿ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಅತ್ಯಂತ ಹಿರಿದಾಗಿದೆ. ಮಕ್ಕಳು ತಮ್ಮನ್ನು ತಾವು ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಕ್ರೀಡಾ ಕ್ಷೇತ್ರಕ್ಕೆ ಸರ್ಕಾರ ಅನೇಕ ಸೌಲಭ್ಯ ಒದಗಿಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರದ ಮಟ್ಟದಲ್ಲಿ ಆಸಕ್ತಿಯುತ ಕ್ರೀಡೆಯಲ್ಲಿ ಸತತ ಪ್ರಯತ್ನ ಹಾಗೂ ಕಠಿಣ ಅಭ್ಯಾಸ ರೂಢಿಸಿಕೊಂಡು ಕ್ರೀಡಾ ಸಾಧಕರಾಗಿ, ಕ್ರೀಡಾ ಸೆಲೆಬ್ರೆಟಿಗಳಾಗಬೇಕು ಎಂದು ಅವರು ಹೇಳಿದರು.
ಡಾ.ಜಾವೀದ ಜಮಾದಾರ ಅವರು ಮಾತನಾಡಿ, ಕ್ರೀಡಾ ಕ್ಷೇತ್ರದಲ್ಲಿ ಹೊಸ ಸಾಧನೆಯ ಬರೆದು ಮೈಲುಗಲ್ಲು ಸ್ಥಾಪಿಸುವ ಮೂಲಕ ಜಿಲ್ಲೆ, ರಾಜ್ಯದ ಕೀರ್ತಿಯನ್ನು ಹೆಚ್ಚಿಸಬೇಕು. ಮಾನಸಿಕ ಹಾಗೂ ದೈಹಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಭಾಗಿಯಾಗಿ, ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ ಎಂಬುದು ಮನವರಿಕೆ ಮಾಡಿಕೊಂಡು ಯುವಕರು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಕೊಳ್ಳುವುದರ ಮೂಲಕ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಮೇಯರ್ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಕ್ರೀಡಾಧಿಕಾರಿಗಳಾದ ರಾಜಶೇಖರ ದೈವಾಡಿ,ಕ್ರೀಡಾ ಇಲಾಖೆ ಕಚೇರಿಯ ಅಧೀಕ್ಷಕ ಪ್ರಿಯಂಕಾ ಜಿ, ಟಿ.ಪಿ. ಆಲೂರು, ಸಂಗೀತಾ ಮಠಪತಿ, ದೈಹಿಕ ಶಿಕ್ಷಕರು, ಕ್ರೀಡಾ ತರಬೇತಿದಾರರು, ಕ್ರೀಡಾಪಟುಗಳು ಹಾಗೂ ಕ್ರೀಡಾಸಕ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ
