66 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಶಾಲಾ ಮಕ್ಕಳು ಬೆಂಬಲ

ಸಪ್ತ ಸಾಗರ ವಾರ್ತೆ, ವಿಜಯಪುರ, ನ. 22:
ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾತಿಗೆ ಆಗ್ರಹಿಸಿ ಹೋರಾಟ ಸಮಿತಿಯ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಬಸವನ ಬಾಗೇವಾಡಿ ಮತಕ್ಷೇತ್ರದ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಉಪಾಧ್ಯಾಯ ಎ. ಎಂ. ಪಾಟೀಲ ಅವರು ಮಾತನಾಡಿ, ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬಡ ಮಕ್ಕಳಿಗಾಗಿ,ಕೃಷಿ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಹಾಯವಾಗುತ್ತದೆ. ನಮ್ಮ ಜಿಲ್ಲೆಯ ಎಲ್ಲಾ ಮಕ್ಕಳು ವೈದ್ಯಕೀಯ ಶಿಕ್ಷಣ ಪಡೆಯುವಂತಾಗಲಿ ಎಂದು ಹೇಳಿದರು.
ಸಹ ಶಿಕ್ಷಕ ಎ. ಎಸ್. ಹೊನಯಾಳ ಮಾತನಾಡಿ, ಸರಕಾರಿ ಆಸ್ಪತ್ರೆಯ ಹಿಂದೆ 153 ಎಕರೆ ಜಮೀನು ಇರುವುದರಿಂದ ನಮಗೆ ಅತಿ ಬೇಗ ವೈದ್ಯಕೀಯ ಕಾಲೇಜು ಆರಂಭಿಸಬಹುದು. ಇಂತಹ ಅವಕಾಶ ಬೇರೆ ಯಾವ ಜಿಲ್ಲೆಗೂ ಇಲ್ಲ. ನಮ್ಮ ಆಸ್ಪತ್ರೆ ಸುಸಜ್ಜಿತ ಜಾಗವನ್ನು ಹೊಂದಿದೆ. ಅದಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಿಸಿ, ಮಕ್ಕಳ ಉನ್ನತ ಶಿಕ್ಷಣ ಕಲಿಯುವಂತಾಗಲಿ ಎಂದು ಹೇಳಿದರು.
ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Share this