ಜನತಾ ನ್ಯಾಯಾಲಯದಲ್ಲಿ 16,678 ಪ್ರಕರಣ ಇತ್ಯರ್ಥ: ರಾಜಿ ಸಂಧಾನದ ಮೂಲಕ ಶೀಘ್ರ ನ್ಯಾಯಕ್ಕೆ ನ್ಯಾಯಾಧೀಶರ ಕರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:
ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿತಾಯವಾಗುವುದರಿಂದ ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್ (ಜನತಾ ನ್ಯಾಯಾಲಯ) ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಸಲಹೆ ನೀಡಿದರು.
ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರ್ಷಗಳ ಕಾಲ ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ ಪರಸ್ಪರ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವುದು ಎಲ್ಲರಿಗೂ ಅನುಕೂಲಕರವಾಗಿದೆ ಎಂದು ಹೇಳಿದರು.
ಈ ಬಾರಿ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ಗೆ ಉತ್ತಮ ಸ್ಪಂದನೆ ದೊರೆತಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿದ್ದ 16,678 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಎಂದು ತಿಳಿಸಿದರು.
ಆಸ್ತಿ ವಿಭಾಗ, ಚೆಕ್ ಬೌನ್ಸ್, ಮೋಟಾರು ವಾಹನ ಅಪಘಾತ ಪರಿಹಾರ, ಜೀವನಾಂಶ, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಅಮಲು ಜಾರಿ ಪ್ರಕರಣಗಳು ಸೇರಿದಂತೆ ವಿವಿಧ ಸ್ವರೂಪದ ವ್ಯಾಜ್ಯಗಳು ಕಕ್ಷಿದಾರರು ಮತ್ತು ವಕೀಲರ ಸಹಕಾರದಿಂದ ಯಶಸ್ವಿಯಾಗಿ ಇತ್ಯರ್ಥಗೊಂಡಿರುವುದು ವಿಶೇಷ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಮಾತನಾಡಿ, ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದು ಸಮಾಜದಲ್ಲಿ ಸೌಹಾರ್ದಯುತ ಜೀವನ ನಡೆಸಬೇಕು ಎಂದು ಕರೆ ನೀಡಿದರು.
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವಿಜಯಪುರ ನಗರ ಹಾಗೂ ತಾಲೂಕಿನ ವ್ಯಾಪ್ತಿಯ 21 ದಂಪತಿಗಳು ರಾಜಿ ಸಂಧಾನದ ಮೂಲಕ ತಮ್ಮ ವೈವಾಹಿಕ ಜೀವನವನ್ನು ಮುಂದುವರಿಸಲು ಒಪ್ಪಿಗೆ ಸೂಚಿಸಿರುವುದು ಕಾರ್ಯಕ್ರಮದ ಮತ್ತೊಂದು ವಿಶೇಷವಾಗಿತ್ತು.
ಜನತಾ ನ್ಯಾಯಾಲಯ ಯಶಸ್ವಿಯಾಗಲು ಸಹಕರಿಸಿದ ಕೆಬಿಜೆಎನ್‌ಎಲ್ ಅಧಿಕಾರಿಗಳು, ವಕೀಲರು, ಕಕ್ಷಿದಾರರು, ಪೊಲೀಸ್ ಅಧಿಕಾರಿ-ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾಯಾಧೀಶ ಹರೀಶ ಎ. ಅಭಿನಂದಿಸಿದ್ದಾರೆ.

Share this