ಸಪ್ತಸಾಗರ ವಾರ್ತೆ, ವಿಜಯಪುರ, ಡಿ.1: ಬದುಕಿನ ಪ್ರತಿ ಹಂತದಲ್ಲೂ ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡುವ ಮೂಲಕ ಯಶಸ್ವಿಯಾಗಿ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಸೋಮವಾರ ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವ ವಿವಿಧ ಆಟೋಟಗಳ ಸ್ಪರ್ಧೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಕ್ರೀಡಾ ಪ್ರತಿಭೆಯನ್ನು ಮೆರೆಯಬೇಕು. ಜಿಲ್ಲೆಯ 5 ತಾಲೂಕುಗಳಲ್ಲಿ ವಿಕಲಚೇತನರ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು ಇದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ತಾಲೂಕು ಮಟ್ಟದಲ್ಲಿ ಆಯೋಜಿಸಿದ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾಗಿ ಇದೀಗ ಜಿಲ್ಲಾ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಭಾಗಿಯಾಗಿರುವ ತಾವುಗಳು, ವಿಜೇತರಾಗಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ, ಜಿಲ್ಲೆಗೆ ಕೀರ್ತಿ ತರಬೇಕು ಎಂದು ಅವರು ಹೇಳಿದರು.
ಕ್ರೀಡೆಗಳು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ವಿಶೇಷ ಚೇತನರು ಕೀಳರಿಮೆಯನ್ನು ತೊಡೆದು ಹಾಕಿ ಎಂದು ಅವರು ಹೇಳಿದರು.
ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡಾ ನಿಯಮಗಳನ್ನು ಅನುಸರಿಸುವ ಮೂಲಕ ಎಲ್ಲರೂ ಸಂತೋಷದಿAದ ಕ್ರೀಡೆಗಳಲ್ಲಿ ಭಾಗವಹಿಸಿ, ಈ ಕ್ರೀಡೆಗಳು ತಮ್ಮ ಜೀವನದಲ್ಲಿ ಅವಿಸ್ಮರಣೀಯವಾಗಿ ಉಳಿಯಲಿ,ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಸಾಧನೆ ಮಾಡಿ ಎಂದು ಅವರು ಹೇಳಿದರು.
ವಿಶೇಷಚೇತನರು ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿ ಬದುಕು ನಿರ್ವಹಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ವಿಶೇಷ ಚೇತನರು ಯಾವುದೇ ಕಷ್ಟಕರ ಹಾಗೂ ಕ್ಲಿಷ್ಟÀ್ಟಕರ ಪರಿಸ್ಥಿತಿಯಲ್ಲಿ ಧೃತಿಗೆಡದೆ ಧೈರ್ಯದಿಂದ ಮುನ್ನಡೆಯಬೇಕು. ತಮ್ಮ ಯಾವುದೇ ಸಮಸ್ಯೆಗಳಿದಲ್ಲಿ,ತಮ್ಮನ್ನು ಹಾಗೂ ಸಂಬಂಧಿಸಿದ ಇಲಾಖೆಯನ್ನು ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಡಾ. ಜಾವೆದ್ ಜಮಾದಾರ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಸಮಾಜದಲ್ಲಿ ಗುರುತಿಸಿಕೊಳ್ಳಬಹುದಾಗಿದೆ. ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆ ಹೊಂದಲು ಕ್ರೀಡೆಗಳು ಸಹಕಾರಿಯಾಗಿವೆ. ನಿರಂತರ ಪರಿಶ್ರಮ, ಸಮಯ ಪರಿಪಾಲನೆ ಕೌಶಲ್ಯಗಳ ರೂಢಿಸಿಕೊಳ್ಳುವಿಕೆ ಕ್ರೀಡಾ ಸಾಧನೆಗೆ ಪೂರಕವಾಗಿ ಪ್ರೇರಕವಾಗಿವೆ. ಪರಸ್ಪರ ಸಹಕಾರ ಮನೋಭಾವನೆ ಹೊಂದಿ,ಜೀವನದಲ್ಲಿ ಯಶಸ್ಸನ್ನು ಸಾಧಿಸಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಜಗದೀಶ ಕೆಂಪಣ್ಣವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ, ಅಡಿವೆಪ್ಪ ಸಾಲಗಲ, ಸಂಜೀವ ಖೋತ್, ಸುಮಿತ ಪಾಂಡಿಚೇರಿ, ವಿನೋದ ಖೇಡ, ನಿಮಿಷಾಚಾರ್ಯ, ಮಹೇಶ ಮುಧೋಳ, ವಿಠ್ಠಲ ಹಂಚನಾಳ, ಮಹೇಶ ತೋಟದ, ಶ್ರೀಪಾದ ಜೋಶಿ, ಜಿಲ್ಲಾ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಸ್ಥಿತರಿದ್ದರು.
ಆತ್ಮವಿಶ್ವಾಸ ಹಾಗೂ ದೃಢಸಂಕಲ್ಪದೊಂದಿಗೆ ಮುನ್ನಡೆದು ಸಾಧನೆ ಮಾಡಿ -ರಿಷಿ ಆನಂದ


