ಸಪ್ತಸಾಗರ ವಾರ್ತೆ, ವಿಜಯಪುರ, ಡಿ.2 :
ಜಿಲ್ಲೆಯಾದ್ಯಂತ ಡಿಸೆಂಬರ್ 21 ರಿಂದ 24ರವರೆಗೆ ನಾಲ್ಕು ದಿನಗಳವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಪಾಲಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಡಿಸೆಂಬರ್ 21ರಂದು ಬೂತ್ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ನಂತರದ ಮೂರು ದಿನ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ ಎಂದು ತಿಳಿಸಿದರು.
ಐದು ವರ್ಷದೊಳಗಿನ ಯಾವುದೇ ಮಗು ಈ ಕಾರ್ಯಕ್ರಮದಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಈ ಲಸಿಕಾ ಕಾರ್ಯಕ್ರಮಕ್ಕೆ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಕಾಳಜಿ ವಹಿಸಿ, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಸಿಕೆ ಕೊಡಿಸಬೇಕು. ಸಂಬಂಧಿಸಿದ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು. ಐದು ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕು. ಸಂಘ ಸಂಸ್ಥೆಗಳ ಸಹಕಾರ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಹೇಳಿದರು.
ಜಿಲ್ಲಾದ್ಯಂತ ಒಟ್ಟು 2,95,156 ಮಕ್ಕಳು ಲಸಿಕೆ ಪಡೆಯುವುದಕ್ಕಾಗಿ ಗುರುತಿಸಲಾಗಿದೆ. ಲಸಿಕಾ ಕಾರ್ಯಕ್ಕೆ ಒಟ್ಟು 1331 ಬೂತ್ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೇ 23 ಮೊಬೈಲ್ ಟೀಮ್ಗಳನ್ನೂ ಕೂಡ ಸ್ಥಾಪಿಸಲಾಗಿದೆ. ಪ್ರತಿ ಬೂತ್ಗೆ ಇಬ್ಬರು ಸದಸ್ಯರು, ಐದು ತಂಡಕ್ಕೆ ಒಬ್ಬ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದು, ಪ್ರತಿ ಬೂತ್ ಮಟ್ಟದ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ತೆರಳಿ ತಪ್ಪದೇ ಪೋಲಿಯೊ ಲಸಿಕೆ ಹಾಕಲಿದ್ದಾರೆ ಎಂದರು.
ಲಸಿಕಾ ಕಾರ್ಯಕ್ರಮಕ್ಕೆ 2778 ಸಿಬ್ಬಂದಿಗಳು, 278 ಮೇಲ್ವಿಚಾರಕರು ಹಾಗೂ ಹೆಚ್ಚುವರಿಯಾಗಿ 183 ಮೇಲ್ವಿಚಾರಕ ಸಿಬ್ಬಂದಿಯನ್ನು ಕಾಯ್ದಿರಿಸಿಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 61 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಎಲ್ಲ ಕೇಂದ್ರಗಳಿಗೆ ಲಸಿಕೆ ಪೂರೈಸಲು ಕ್ರಮವಹಿಸಲು ವಾಹನ ಒದಗಿಸುವಂತೆ ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ ಸೂಚಿಸಲಾಯಿತು.
ಪೊಲೀಯೋ ಲಸಿಕೆ ಕುರಿತು ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆಯೂ, ಪಾಲಕರ ಸಭೆ ಏರ್ಪಡಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವಲಸೆ ಕಾರ್ಮಿಕರ ಮಕ್ಕಳು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ನಿಗಾ ವಹಿಸಲು ಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲಸಿಕಾ ಅಭಿಯಾನದ ಎರಡು ದಿನ ಮುನ್ನ ಎಲ್ಲ ಲಸಿಕಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮವಹಿಸಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ,ಅವರು ಪ್ರತಿ ಗ್ರಾಮಗಳಲ್ಲಿ ಕರಪತ್ರ,ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಲಸಿಕಾ ಅಭಿಯಾನ ಯಶಸ್ವಿಗೊಳಿಸುವಂತೆ ನೋಡಿಕೊಳ್ಳುವಂತೆ ಸಂಬAದಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಡಬ್ಲೂಎಚ್ಓ ಕಂಸಲ್ಟೆಂಟ್ ಡಾ.ಮುಕುಂದ ಗಲಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಪ್ರಾದೇಶಿಕ ಸಾರಿಗೆ ಆಯುಕ್ತರಾದ ವಸೀಂ ಬಾಬಾ ಮುದ್ದೇಬಿಹಾಳ, ಡಾ. ಎಸ್.ಎಲ್ ಲಕಣ್ಣವರ, ಡಾ. ಎಲ್. ಎಚ್.ಬಿದರಿ, ಪೀಟರ್ ಅಲೆಕ್ಸಾಂಡರ್, ಡಾ. ಪರಶುರಾಮ ಹಿಟ್ನಳ್ಳಿ, ಡಾ.ಜಾನ್ ಕಟವಟೆ, ಡಾ.ಅಪ್ಪಾಸಾಹೇಬ ಇನಾಮದಾರ, ಡಾ. ಶಶಿಕಾಂತ ಬಾಗೇವಾಡಿ, ಡಾ.ಕೇಸರಸಿಂಗ್ ಗುಂಡಬಾವಡಿ, ಡಾ.ಕವಿತಾ ದೊಡಮನಿ, ಡಾ.ಸತೀಶ್ ತಿವಾರಿ, ಡಾ. ರವಿ ನಾಗನೂರ, ಡಾ.ಪ್ರಶಾಂತ ದುಮಗೊಂಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಡಿ.21 ರಿಂದ ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ


