ಸಪ್ತಸಾಗರ ವಾರ್ತೆ ವಿಜಯಪುರ, ಮೇ. 12:
ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ ಗೆ 7,721 ರೂ. ಬೆಂಬಲೆ ಬೆಲೆಯಡಿ ಖರೀದಿಗೆ ರೈತರ ನೋಂದಣಿಯನ್ನು 50 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 60 ದಿನಗಳವರೆಗೆ ನಿಗದಿಪಡಿಸಿ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಬೆಂಬಲ ಬೆಲೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿಗಾಗಿ ಜಿಲ್ಲೆಯ ಬಬಲೇಶ್ವರ, ಸವನಹಳ್ಳಿ, ಬೆಳ್ಳುಬ್ಬಿ, ತಾಜಪುರ, ವಿಜಯಪುರ, ಮುದ್ದೇಬಿಹಾಳ, ತಾಳಿಕೋಟೆ, ತಂಗಡಗಿ, ಇಂಡಿ, ಚಡಚಣ, ಹಲಸಂಗಿ, ಸಿಂದಗಿ, ಬಸವನಬಾಗೇವಾಡಿ ಸೇರಿದಂತೆ ಒಟ್ಟು 13 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ, ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಸಂಸ್ಥೆಯನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದ್ದು, ನಾಫೆಡ್ ಸಂಸ್ಥೆಗಳ ಮೂಲಕ ಖರೀದಿ ಕೇಂದ್ರಗಳಲ್ಲಿ ನೋಂದಣಿಯೊಂದಿಗೆ ಖರೀದಿ ಪ್ರಾರಂಭಿಸುವಂತೆ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚಿಸಲಾಯಿತು.
ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ ದಿಂದ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸುವಂತೆ ಹಾಗೂ ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಯಂತೆ ಖರೀದಿಸಿದ ಉತ್ಪನ್ನದ ಮೌಲ್ಯವನ್ನು ರೈತರಿಗೆ 05 ದಿನದ ಒಳಗಾಗಿ ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನ ಮೌಲ್ಯವು ಡಿಬಿಟಿ ಮೂಲಕ ಜಮೆ ಆಗುವಂತೆ ಪಾವತಿ ಮಾಡಬೇಕು. ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಯಿತು.
ಹಿಂಗಾರು ಹಂಗಾಮಿನಲ್ಲಿ 161 ಹೆಕ್ಟೇರ್ ಕ್ಷೇತ್ರದಲ್ಲಿ ಸೂರ್ಯಕಾಂತಿ ಬಿತ್ತನೆಯಾಗಿದ್ದು, ಅಂದಾಜು 2898 ಕ್ವಿಂಟಲ್ ಇಳುವರಿ ಬರಬಹುದೆಂದು ಅಂದಾಜಿಸಿರುವ ಕುರಿತು ಹಾಗೂ ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ಗೆ 6284 ರೂ.ರವರೆಗಿನ ದರಕ್ಕೆ ಮಾರಾಟವಾಗುತ್ತಿರುವ ಕುರಿತು ಅಧಿಕಾರಿಗಳು ಸಭೆಗೆ ತಿಳಿಸಿದರು.
ಸಭೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರು, ಕೆಒಎಫ್ ಜಿಲ್ಲಾ ವ್ಯವಸ್ಥಾಪಕರು, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಸೇರಿದಂತೆ ಮೂರು ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸದಸ್ಯ ಕಾರ್ಯದರ್ಶಿ ಶಿವಾನಂದ ಗೋರೆ ಉಪಸ್ಥಿತರಿದ್ದರು.
ಪ್ರತಿ ಕ್ವಿಂಟಲ್ ಗೆ 7,721 ರೂ. ಬೆಂಬಲ ಬೆಲೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿ: ಜಿಲ್ಲಾಧಿಕಾರಿ ಆನಂದ


