ಪ್ರೊ.ಭಗವಾನ್ ವಿರುದ್ಧ ಕಠಿಣ ಕ್ರಮಕ್ಕೆ ಸ್ವರಾಜ್ಯ ಸೇನಾ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17:
ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ ಪ್ರೊ.ಕೆ.ಎಸ್.ಭಗವಾನ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಜಯಪುರ ಸ್ವರಾಜ್ಯ ಸೇನಾ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕಿರಣ ಕಾಳೆ, ಇಡೀ ವಿಶ್ವಕ್ಕೆ ಆದರ್ಶವಾಗಿರುವ ಶ್ರೀ ರಾಮನ ಬಗ್ಗೆ ಮತ್ತು ಹಿಂದೂ ಸಂಸ್ಕೃತಿ ಬಗ್ಗೆ ಪ್ರೊ. ಕೆ.ಎಸ್.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದು ಖಂಡನೀಯ. ಚುನಾವಣೆ ಸಮಯದಲ್ಲಿ ನನ್ನ ಹೆಸರಿನಲ್ಲೂ ರಾಮ ಇದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹೇಳಿದ್ದರೆ, ನಾನು ಹಿಂದು ಇದ್ದೇನೆ, ರಾಜಕೀಯಕ್ಕಾಗಿ ನನ್ನ ಧರ್ಮ ಬಿಡಲಾಗಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರವರೇ, ನಿಮ್ಮ ಹಿಂದು ಧರ್ಮದ ಬಗ್ಗೆ ಅವಹೇಳನ ನಡೆದರೂ ತಾವು ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಕೂಡಲೇ ಸರ್ಕಾರ ಇಂತಹ ಹಿಂದೂ ವಿರೋಧಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಸಮಸ್ತ ಹಿಂದೂ ಬಾಂಧವರು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಆನಂದ ಚೌಧರಿ, ಪವನ ನಲಗೆ, ಗಣೇಶ ಗರುಡಕರ, ಸ್ವರೂಪ ಸಪ್ತಾಳೆ, ಆಕಾಶ ಗೋತ್ರಾಳೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share this