ಭಾನು ಮುಸ್ತಾಕ್ ಸ್ಪಷ್ಟನೆ ನೀಡಿ ದಸರಾ ಉದ್ಘಾಟಿಸಲಿ: ಯತ್ನಾಳ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 24:
ಲೇಖಕಿ ಬಾನು ಮುಸ್ತಾಕ್ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿ ದಸರಾ ಉತ್ಸವ ಉದ್ಘಾಟಿಸುವುದು ಸರಿಯಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.
ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ, ಅಥವಾ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ ಶ್ರೀಮತಿ ಭಾನು ಮುಶ್ತಾಕ್ ಅವರು ಸ್ಪಷ್ಟನೆ ನೀಡುವುದು ಅಗತ್ಯ.
ಈ ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ. ಆದರೆ, ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ಅಷ್ಟೇ ಸರಿ ಎನಿಸುತ್ತದೆ ಎಂದು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

Share